ಆರ್ಥಿಕ- ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ: ಸಿದ್ದರಾಮಯ್ಯ
ಹಾವೇರಿ: ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ ಮೈಲಿಗಲ್ಲಾಗಿ ಅಲ್ಲ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತಿದ್ದೇವೆ. ಇಲ್ಲಿಯವರೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದು, ಮುಂದೆಯೂ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದ ಸರ್ಕಾರಿ ಮೆಡಿಕಲ್ ಕಾಲೇಜು ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿಯವರು ಸಮಾವೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ವಿರೋಧಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದ ನಾಲ್ಕು ವರ್ಷಗಳ ಕಾಲ ಏನೂ ಮಾಡಿರಲಿಲ್ಲ ಎಂದರು.
ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ. ನಾಲ್ಕು ವರ್ಷಗಳಲ್ಲಿ ಅವರು ಏನು ಮಾಡಿದ್ದಾರೆ. 2018 ರಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇ.10% ರಷ್ಟು ಈಡೇರಿಸಿಲ್ಲ. ನಾವು ನೀಡಿದ್ದ 592 ಭರವಸೆಗಳಲ್ಲಿ 243 ಭರವಸೆಗಳನ್ನು ಎರಡೂವರೆ ವರ್ಷಗಳಲ್ಲಿ ಈಡೇರಿಸಿದ್ದೇವೆ. ಉಳಿದವನ್ನು ಈಡೇರಿಸಲು ಪ್ರಯತ್ನಿಸುತ್ತೇವೆ ಎಂದರು.
ಅಧಿಕಾರ ಹಂಚಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ಈಗಾಗಲೇ ತಿಳಿಸಲಾಗಿದೆ. ವರಿಷ್ಠರು ಹೇಳಿದ್ದನ್ನು ಪಕ್ಷದ ಎಲ್ಲರೂ ಕೇಳಬೇಕು ಎಂದರು. ಶಾಸಕರು ಈ ಬಗ್ಗೆ ಮಾಡಿರುವ ಟ್ವೀಟ್ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು ಮಾಡಿದ್ದರೆ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದರು.
ಹೈಕಮಾಂಡ್ ಶಿವರಾತ್ರಿಯ ನಂತರ ಬದಲಾವಣೆ ಎಂದು ಹೇಳಿದ್ದಾರೆಯೇ ಎಂಬ ಪ್ರಶ್ನೆಗೆ ಅವರು ದೆಹಲಿಗೆ ಕರೆದಾಗ ಹೋಗುವುದಾಗಿ ತಿಳಿಸಿ, ಅಧಿಕಾರ ಹಂಚಿಕೆಯ ಬಗ್ಗೆ ಈಗಾಗಲೇ ಉತ್ತರಿಸಿದ್ದು, ಈ ಬಗ್ಗೆ ಪದೇ ಪದೇ ಪ್ರಶ್ನೆ ಕೇಳಬೇಡಿ ಎಂದರು.
ಕೇಂದ್ರ ಸರ್ಕಾರದ ಬಗ್ಗೆ ಭರವಸೆ, ನಂಬಿಕೆ ಇಲ್ಲ
ಬೇಡ್ತಿ- ವರದಾ ನದಿಯ ಜೋಡಣೆ ಬಗ್ಗೆ ಉತ್ತರ ಕನ್ನಡ ಜನತೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಡಿಪಿಆರ್ ನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗಿದ್ದು ಅವರು ತೀರ್ಮಾನ ಕೈಗೊಳ್ಳಬೇಕಾಗಿದೆ. ಕೇಂದ್ರ ಸರ್ಕಾರ ಯಾವುದರ ಬಗ್ಗೆಯೂ ತೀರ್ಮಾನ ಮಾಡುತ್ತಿಲ್ಲ. ಹಾಗಾಗಿ ನಮಗೆ ಅವರು ತೀರ್ಮಾನ ಕೈಗೊಳ್ಳುವ ಬಗ್ಗೆ ಭರವಸೆಯಾಗಲಿ, ನಂಬಿಕೆಯಾಗಲಿ ಇಲ್ಲ ಎಂದರು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿ ಶೀಘ್ರದಲ್ಲಿಯೇ ಸಲ್ಲಿಕೆಯಾಗಲಿದ್ದು, ಅದರ ಮೇಲೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದರು