Jammu-Kashmir: ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ಸುಧಾರಿತ ಸ್ಫೋಟಕ ವಸ್ತು ಪತ್ತೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಬಾರಾಮುಲ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಗ್ರರು ಅಳವಡಿಸಿದ್ದ ಸುಧಾರಿತ ಸ್ಫೋಟಕ ಸಾಧನವನ್ನು (IED) ಭದ್ರತಾ ಪಡೆಗಳು ಬುಧವಾರ ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಿವೆ. ಈ ಮೂಲಕ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ
ಬುಧವಾರ ಬೆಳಿಗ್ಗೆ ಸುಮಾರು 7 ಗಂಟೆಯ ವೇಳೆಗೆ ಹೆದ್ದಾರಿಯ ನರ್ಬಾಲ್ ಎಂಬಲ್ಲಿ ರಸ್ತೆ ಬದಿಯಲ್ಲಿ ಅನುಮಾನಾಸ್ಪದ ಬ್ರೀಫ್ಕೇಸ್ (Briefcase) ಒಂದು ಬಿದ್ದಿರುವುದನ್ನು ಗಸ್ತಿನಲ್ಲಿದ್ದ ಭದ್ರತಾ ಪಡೆಗಳು ಗಮನಿಸಿವೆ. ಕೂಡಲೇ ಎಚ್ಚೆತ್ತ ಯೋಧರು ಇಡೀ ಪ್ರದೇಶವನ್ನು ಸುತ್ತುವರಿದು ಬಿಗಿ ಬಂದೋಬಸ್ತ್ ಏರ್ಪಡಿಸಿದರು.
ತಾತ್ಕಾಲಿಕ ಸಂಚಾರ ಸ್ಥಗಿತ
ಸುರಕ್ಷತೆಯ ದೃಷ್ಟಿಯಿಂದ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಯಿತು. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಬಾಂಬ್ ವಿಲೇವಾರಿ ದಳ ತಪಾಸಣೆ ನಡೆಸಿದಾಗ, ಬ್ರೀಫ್ಕೇಸ್ ಒಳಗೆ ಸ್ಫೋಟಕ ಇರುವುದು ದೃಢಪಟ್ಟಿದೆ. ಸದ್ಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಪುನರಾರಂಭಿಸಲಾಗಿದ್ದು, ಉಗ್ರರ ಪತ್ತೆಗಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.