ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ: ಜಿಲ್ಲಾಧಿಕಾರಿ ಅವರ ಸರ್ಕಾರಿ ನಿವಾಸಕ್ಕೆ ಬುಧವಾರ ಬಾಂಬ್ ಬೆದರಿಕೆಯ ಕರೆ ಬಂದಿದ್ದು, ಪರಿಶೀಲನೆಯ ಬಳಿಕ ಹುಸಿ ಎಂಬುದು ಖಚಿತವಾಗಿದೆ. ಇಲ್ಲಿನ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ನಿವಾಸದಲ್ಲಿ ಬಾಂಬ್ ಇಡಲಾಗಿದೆ ಎಂಬುದಾಗಿ ತುರ್ತು ಸಹಾಯವಾಣಿ 112ಗೆ ಮಧ್ಯಾಹ್ನ 2.40ಕ್ಕೆ ಕರೆ ಬಂದಿದೆ. ತಕ್ಷಣ ಅವರ ನಿವಾಸಕ್ಕೆ ಧಾವಿಸಿದ ಬಾಂಬ್ ಪತ್ತೆದಳ ಹಾಗೂ ಶ್ವಾನದಳದ ಸಿಬ್ಬಂದಿ ಒಂದು ಗಂಟೆಗೂ ಅಧಿಕ ಹೊತ್ತು ಪರಿಶೀಲನೆ ನಡೆಸಿದವು. ಬೆದರಿಕೆ ಕರೆ ಮಾಡಿದ ವ್ಯಕ್ತಿ ಕನ್ನಡದಲ್ಲಿ ಮಾತನಾಡಿದ್ದು, 45 ನಿಮಿಷಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಸಿದ್ದಾನೆ. ಹೀಗಾಗಿ, ನಿವಾಸದ ಆವರಣ, ಕೈತೋಟ, ಕೊಠಡಿ, ವಾಹನಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸಿದರು. ನಿವಾಸದಲ್ಲಿ ಯಾವುದೇ ಸ್ಫೋಟಕ ಪತ್ತೆಯಾಗಲಿಲ್ಲ. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಮಧ್ಯಾಹ್ನದ ಊಟ ಮುಗಿಸಿ ಕರ್ತವ್ಯಕ್ಕೆ ತೆರಳಿದ್ದರು. ಜಿಲ್ಲಾಧಿಕಾರಿ ಅವರ ತಾಯಿ ಮಾತ್ರ ನಿವಾಸದಲ್ಲಿದ್ದರು. ಫೆ.16ರಂದು ಜಿಲ್ಲಾ ನ್ಯಾಯಾಲಯಕ್ಕೆ ಹಾಗೂ ಡಿ.16ರಂದು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆಯ ಇ–ಮೇಲ್ ಸಂದೇಶಗಳು ಬಂದಿದ್ದವು.