ಕುಡಿಯುವ ನೀರಿನ ಬಗ್ಗೆ ಚರ್ಚೆ: ಅಧಿಕಾರಿಗಳ ಬೆವರಿಳಿಸಿದ ಸಚಿವ ಬೈರತಿ ಸುರೇಶ್
ಕೋಲಾರ: ಕುಡಿಯುವ ನೀರಿನ ವಿಚಾರವಾಗಿ ಸರಿಯಾಗಿ ಮಾಹಿತಿ ನೀಡದ ಹಾಗೂ ಸಮಸ್ಯೆ ನೀಗಿಸಲು ಕ್ರಮ ವಹಿಸದ ಅಧಿಕಾರಿಗಳನ್ನು ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಬೆವರಿಳಿಸಿದ ಪ್ರಸಂಗ ನಡೆಯಿತು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಬೇಸಿಗೆ ಶುರುವಾಗಿದ್ದು, ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಸೃಷ್ಟಿಯಾದರೆ, ಜನರಿಂದ ದೂರುಗಳು ಬಂದರೆ ಸುಮ್ಮನಿರಲ್ಲ. ನೆಪ ಹೇಳದೆ ಕೆಲಸ ಮಾಡಿ ನೀರು ಪೂರೈಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಕುಡಿಯುವ ನೀರಿನ ವಿಚಾರವಾಗಿ ಸುದೀರ್ಘವಾಗಿ ಚರ್ಚಿಸಲಾಯಿತು.
ಪ್ರಮುಖವಾಗಿ ಜಿಲ್ಲಾ ಪಂಚಾಯಿತಿ ಸಿಇಒ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ತಹಶೀಲ್ದಾರ್ಗಳನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಶಾಸಕ ಕೆ.ವೈ.ನಂಜೇಗೌಡ ಕೂಡ ದನಿಗೂಡಿಸಿದರು.
ಜಲಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿ ಕೊರೆದ 266ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಬಾಕಿ ಇರುವುದಕ್ಕೆ ಸಚಿವರು ಅತೃಪ್ತಿ ವ್ಯಕ್ತಪಡಿಸಿದರು. ಕಾರಣ ಹೇಳಲು ಮುಂದಾದ ಕಾರ್ಯಪಾಲಕ ಎಂಜಿನಿಯರ್ ರಘು ಅವರಿಗೆ ಎಚ್ಚರಿಕೆ ನೀಡಿದರು. ಕೂಡಲೇ ಠೇವಣಿ ಪಾವತಿಸಿ ಸಂಪರ್ಕ ಪಡೆಯಲು ಹಾಗೂ ಬಾಕಿ ಬಿಲ್ ಪಾವತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.