ಇಂದಿರಾ ಆಹಾರ ಕಿಟ್ ವಿತರಣೆಗೆ 6,200 ಕೋಟಿ ರೂ. ನೀಡಿಕೆ : ತೊಗರಿ ಬೇಳೆ, ಸಕ್ಕರೆ, ಉಪ್ಪು, ಅಡುಗೆ ಎಣ್ಣೆಯ ಕಿಟ್ ನೀಡಿಕೆಯ ಘೋಷಣೆ
ರಾಜ್ಯದಲ್ಲಿ ಬಿಪಿಎಲ್ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಇಂದಿರಾ ಆಹಾರ ಕಿಟ್ ವಿತರಿಸುವುದಾಗಿ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದಕ್ಕಾಗಿ 6,200 ಕೋಟಿ ರೂಪಾಯಿ ಮೀಸಲಿರಿಸಿದ್ದಾರೆ. ತೊಗರಿಬೇಳೆ, ಸಕ್ಕರೆ, ಉಪ್ಪು, ಅಡುಗೆ ಎಣ್ಣೆಯ ಕಿಟ್ ನೀಡಲಾಗುತ್ತೆ. ರಾಜ್ಯ ಬಜೆಟ್ ನಲ್ಲಿ ಆಹಾರ ಇಲಾಖೆಗೆ ಸಂಬಂಧಿಸಿದಂತೆ ಕೆಲ ಮಹತ್ವದ ಘೋಷಣೆಗಳನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಬಿಪಿಎಲ್ ಕುಟುಂಬಗಳಿಗೆ ಇಂದಿರಾ ಆಹಾರ ಕಿಟ್ ವಿತರಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ನಮ್ಮ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ 4.54 ಕೋಟಿ ಫಲಾನುಭವಿಗಳಿಗೆ ಪ್ರತಿ ಮಾಹೆ ಐದು ಕೆ.ಜಿ ಹೆಚ್ಚುವರಿ ಅಕ್ಕಿಯನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆಗಾಗಿ 17,167 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸ್ತುತ ನೀಡಲಾಗುತ್ತಿರುವ ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿ ಮಾಹೆ ಪೌಷ್ಟಿಕಾಂಶವುಳ್ಳ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆ ಒಳಗೊಂಡ ʻಇಂದಿರಾ ಆಹಾರ ಕಿಟ್ʼ ವಿತರಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ 2026-27ನೇ ಸಾಲಿನಲ್ಲಿ 6,200 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ.
ಆಹಾರ ಧಾನ್ಯಗಳ ವಿತರಣೆಗಾಗಿ ನೀಡಲಾಗುವ ಚಿಲ್ಲರೆ ಹಾಗೂ ಸಗಟು ಲಾಭಾಂಶದ ಪಾವತಿಯಲ್ಲಿ ವಿಳಂಬವನ್ನು ನಿವಾರಿಸಲು FIST Application ಮೂಲಕ ಲಾಭಾಂಶವನ್ನು ನೇರವಾಗಿ ಪಾವತಿಸಲಾಗುವುದು.
ಪ್ರಸ್ತುತ ಜಾರಿಯಲ್ಲಿರುವ ಇಲಾಖೆಯ ಸಹಾಯವಾಣಿ (1967) ವ್ಯವಸ್ಥೆಯನ್ನು ಸ್ವಯಂ ಚಾಲಿತ ದೂರು ಕೇಂದ್ರ, ಧ್ವನಿ ಚಾಟ್ಬಾಟ್ ಮತ್ತು ಲೈವ್ ಕರೆ ವರ್ಗಾವಣೆ ವ್ಯವಸ್ಥೆಗಳನ್ನು ಒಳಗೊಂಡ AI ಆಧಾರಿತ ʻSmart Annavaniʼ ಯನ್ನಾಗಿ ಪರಿವರ್ತಿಸಲಾಗುವುದು.
ದಾಸೋಹ ಯೋಜನೆಯಡಿ ಈಗಾಗಲೇ ರಾಜ್ಯದಾದ್ಯಂತ 274 ಕಲ್ಯಾಣ ಸಂಸ್ಥೆಗಳ 32,059 ಫಲಾನುಭವಿಗಳಿಗೆ 14 ಕೋಟಿ ರೂ. ವೆಚ್ಚದಲ್ಲಿ ಆಹಾರ ಭದ್ರತೆಯನ್ನು ಒದಗಿಸಲಾಗುತ್ತಿದ್ದು, ಪ್ರಸಕ್ತ ವರ್ಷದಲ್ಲಿ 34 ಹೊಸ ಕಲ್ಯಾಣ ಸಂಸ್ಥೆಗಳಲ್ಲಿ ಇರುವ 6,701 ಫಲಾನುಭವಿಗಳಿಗೂ ವಿಸ್ತರಿಸಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.