KMF ಚುಕ್ಕಾಣಿ ಯಾರಿಗೆ? ರಂಗೇರಿದ ಅಧ್ಯಕ್ಷೀಯ ಕದನ: ಡಿಕೆ ಸುರೇಶ್, ಕೆವೈ ನಂಜೇಗೌಡ, ರಾಘವೇಂದ್ರ ಹಿಟ್ನಾಳ್ ರೇಸಲ್ಲಿ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲದ (ಕೆಎಂಎಫ್) ಅಧ್ಯಕ್ಷ ಸ್ಥಾನದ ಚುನಾವಣೆ ಮಾರ್ಚ್ ಅಂತ್ಯದೊಳಗೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸಹಕಾರ ಚುನಾವಣಾ ಆಯೋಗ ಮಾರ್ಚ್ 6ರಂದೇ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ನಿರ್ಧರಿಸಿತ್ತು. ಆದರೆ, ಅಂದು ರಾಜ್ಯ ಸರ್ಕಾರದ ಬಜೆಟ್ ಅಧಿವೇಶನ ಆರಂಭಗೊಂಡಿತ್ತು. ರಾಜ್ಯದ 16 ಒಕ್ಕೂಟಗಳ ಪೈಕಿ ಐದು ಒಕ್ಕೂಟಗಳ ಅಧ್ಯಕ್ಷರು ಶಾಸಕರಾಗಿದ್ದಾರೆ. ಅವರೆಲ್ಲರೂ ಅಧಿವೇಶನಕ್ಕೆ ಹಾಜರಾಗಬೇಕಿದ್ದರಿಂದ ತಾತ್ಕಾಲಿಕವಾಗಿ ಚುನಾವಣೆಯನ್ನು ಮುಂದೂಡಲಾಗಿತ್ತು. ಆದರೆ, ಅಧಿವೇಶನ ಮುಗಿಯುವುದರೊಳಗೆ ಚುನಾವಣೆ ನಡೆಸಬೇಕೆಂಬ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ಪ್ರಸ್ತುತ ಬಮೂಲ್ ಅಧ್ಯಕ್ಷರಾಗಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ಮಾಲೂರಿನ ಶಾಸಕ ಕೆ.ವೈ.ನಂಜೇಗೌಡ ಮತ್ತು ಕೊಪ್ಪಳದ ಶಾಸಕ ರಾಘವೇಂದ್ರ ಬಸವರಾಜ ಹಿಟ್ನಾಳ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹಾಸನ, ಕೋಲಾರ, ತುಮಕೂರು, ಬೆಳಗಾವಿ, ಬಳ್ಳಾರಿ, ದಕ್ಷಿಣ ಕನ್ನಡ, ಶಿವಮೊಗ್ಗ, ಮೈಸೂರು, ವಿಜಯಪುರ, ಹಾಸನ, ಮಂಡ್ಯ, ಕೋಲಾರ ಸೇರಿದಂತೆ ಒಟ್ಟು 16 ಹಾಲುಒಕ್ಕೂಟಗಳ ಕೆಎಂಎಫ್ ಪ್ರತಿನಿಧಿಗಳು, ಸರ್ಕಾರದ ಪ್ರತಿನಿಧಿ, ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (ಎನ್ಡಿಡಿಬಿ) ಪ್ರತಿನಿಧಿ, ಸಹಕಾರ ಇಲಾಖೆ ನಿಬಂಧಕರು, ಪಶು ಸಂಗೋಪನೆ ಇಲಾಖೆಯ ನಿರ್ದೇಶಕರು, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಮತ ಚಲಾಯಿಸಲಿದ್ದಾರೆ.