ತಮಿಳುನಾಡು ನೂತನ ರಾಜ್ಯಪಾಲರಾಗಿ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಸ್ವೀಕಾರ
ತಮಿಳುನಾಡಿನ 27ನೇ ರಾಜ್ಯಪಾಲರಾಗಿ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ನಗರದ ಲೋಕ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮದ್ರಾಸ್ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಅವರು ಅರ್ಲೇಕರ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಸ್ತುತ ಕೇರಳದ ರಾಜ್ಯಪಾಲರಾಗಿರುವ ಅರ್ಲೇಕರ್ ಅವರು ತಮಿಳುನಾಡಿನ ಹೆಚ್ಚುವರಿ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಮುಖ್ಯ ಕಾರ್ಯದರ್ಶಿ ಎನ್. ಮುರುಗಾನಂದಂ ಅವರು ರಾಜ್ಯಪಾಲರ ನೇಮಕಾತಿ ಪತ್ರವನ್ನು ಓದಿದರು.
71 ವರ್ಷದ ಅರ್ಲೇಕರ್ ಅವರು ಮೂಲತಃ ಗೋವಾದವರು. ಈ ಹಿಂದೆ ಹಿಮಾಚಲ ಪ್ರದೇಶ ಮತ್ತು ಬಿಹಾರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಗೋವಾ ವಿಧಾನಸಭೆಯ ಸ್ಪೀಕರ್ ಆಗಿ ಹಾಗೂ ಅರಣ್ಯ ಮತ್ತು ಪರಿಸರ ಸಚಿವರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ. ತಮಿಳುನಾಡಿನ ನಿರ್ಗಮಿತ ರಾಜ್ಯಪಾಲ ಆರ್.ಎನ್. ರವಿ ಅವರು ಗುರುವಾರ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ವಿಧಾನಸಭೆ ಸ್ಪೀಕರ್ ಎಂ. ಅಪ್ಪಾವು, ಕೇಂದ್ರ ಸಚಿವ ಎಲ್. ಮುರುಗನ್ ಮತ್ತು ರಾಜ್ಯದ ಪ್ರಮುಖ ಸಚಿವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.