Wayanad: ಜಲ ಜೀವನ್ ಮಿಷನ್ ಬಾಕಿ ಹಣ ಬಿಡುಗಡೆ ಮಾಡಿ: ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಪತ್ರ
ವಯನಾಡು (ಕೇರಳ): ಜಲ ಜೀವನ್ ಮಿಷನ್ ಅಡಿಯಲ್ಲಿ ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಪತ್ರ ಬರೆದಿರುವ ಅವರು, ಯೋಜನೆಯಡಿ ಕೆಲಸ ಮಾಡಿರುವ ಗುತ್ತಿಗೆದಾರರಿಗೆ ಬರಬೇಕಾದ ಹಣವನ್ನು ಶೀಘ್ರವಾಗಿ ಪಾವತಿಸುವಂತೆ ವಿನಂತಿಸಿದ್ದಾರೆ.
ವಯನಾಡು ಜಿಲ್ಲೆಯೊಂದರಲ್ಲೇ ಸುಮಾರು 133.27 ಕೋಟಿ ರೂ. ಬಾಕಿ ಉಳಿದಿದೆ ಎಂದು ಪ್ರಿಯಾಂಕಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬಾಕಿ ಹಣ ಪಾವತಿಯಾಗದ ಕಾರಣ ಗುತ್ತಿಗೆದಾರರು ಹೊಸ ಯೋಜನೆಗಳನ್ನು ವಹಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಹಲವೆಡೆ ನಡೆಯುತ್ತಿದ್ದ ಕುಡಿಯುವ ನೀರಿನ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಜಲ ಜೀವನ್ ಮಿಷನ್ ಯೋಜನೆಯನ್ನು 2028ರವರೆಗೆ ವಿಸ್ತರಿಸಿದೆ. ಆದ್ದರಿಂದ ಮಂಜೂರಾದ ಯೋಜನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಗ್ರಾಮೀಣ ಭಾಗದ ಪ್ರತಿ ಮನೆಗೂ ನಲ್ಲಿಯ ಮೂಲಕ ಸುರಕ್ಷಿತ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ 2019 ರಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು.