ಉಪ ಚುನಾವಣೆ ಸೋತರೆ ಬಿ.ವೈ.ವಿಜಯೇಂದ್ರ ಬದಲಾವಣೆ ನಿಶ್ಚಿತ ಎಂದ ಎಂ.ಬಿ.ಪಾಟೀಲ
ವಿಜಯಪುರ: ‘ದಾವಣಗೆರೆ, ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಸೋತರೆ ಬಿ.ವೈ.ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕುವುದು ನಿಶ್ಚಿತ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಭವಿಷ್ಯ ನುಡಿದರು. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉಪ ಚುನಾವಣೆ ಫಲಿತಾಂಶವು ವಿಜಯೇಂದ್ರ ಅವರ ಅಳಿವು, ಉಳಿವಿನ ಪ್ರಶ್ನೆಯಾಗಿದೆ. ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆಯಲು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಇದನ್ನು ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
‘ಯತ್ನಾಳ ಅವರಿಗೆ ವಿಜಯೇಂದ್ರ ಅವರನ್ನು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ತೆಗೆಯುವ ಉದ್ದೇಶವಿದಿಯೋ ಅಥವಾ ಅವರ ಕೈ ಬಲಪಡಿಸಬೇಕೆಂಬ ಉದ್ದೇಶವಿದೆಯೋ ಗೊತ್ತಿಲ್ಲ. ಉಪ ಚುನಾವಣೆಯಲ್ಲಿ ಒಂದು ವೇಳೆ ಯತ್ನಾಳ ಅವರು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದರೆ ಪರೋಕ್ಷವಾಗಿ ವಿಜಯೇಂದ್ರ ಕೈಬಲಪಡಿಸಿದಂತಾಗುತ್ತದೆ. ಬಿಜೆಪಿ ಗೆದ್ದರೆ ಅದರ ಕ್ರೆಡಿಟ್ ವಿಜಯೇಂದ್ರಗೆ ಹೋಗುತ್ತದೆ’ ಎಂದರು.
‘ಯತ್ನಾಳಗೆ ಸ್ವಾಭಿಮಾನ, ಮಾನ ಮರ್ಯಾದೆ ಇದ್ದರೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಹೋಗಬಾರದು. ಯತ್ನಾಳ ಅವರು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ, ಬಿಜೆಪಿಗೆ ಮರಳಿ ಹೋಗಲು ದಾರಿ ಹುಡುಕುತ್ತಿದ್ದಾರೆ’ ಎಂದು ಹೇಳಿದರು.