ಕೇರಳ ವಿಧಾನಸಭೆ ಚುನಾವಣೆ: ಯುಡಿಎಫ್ ನಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆ
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ, ಪ್ರತಿಪಕ್ಷವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ತನ್ನ ಮಹತ್ವಾಕಾಂಕ್ಷೆಯ ಚುನಾವಣಾ ಪ್ರಣಾಳಿಕೆಯನ್ನು ಇಂದು(ಗುರುವಾರ) ಬಿಡುಗಡೆ ಮಾಡಿದೆ.
ಕಾಂಗ್ರೆಸ್ ನೇತೃತ್ವದ ಈ ಒಕ್ಕೂಟವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ '5+1 ಗ್ಯಾರಂಟಿ' ಯೋಜನೆಗಳನ್ನು ಘೋಷಿಸುವ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದೆ.
ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ವಿ.ಡಿ. ಸತೀಶನ್ ಅವರು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಈ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.
ಕೇರಳ ರಾಜ್ಯ ಸಾರಿಗೆ ಸಂಸ್ಥೆಯ (KSRTC) ಬಸ್ಗಳಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ.
-ಗೌರವಧನ ಹೆಚ್ಚಳ: ಪ್ರಸ್ತುತ ನೀಡಲಾಗುತ್ತಿರುವ 2,000 ರೂ.ಗಳ ಸಾಮಾಜಿಕ ಭದ್ರತಾ ಪಿಂಚಣಿಯನ್ನು 3,000 ರೂ.ಗಳಿಗೆ ಏರಿಕೆ.
-ಉಮ್ಮನ್ ಚಾಂಡಿ ಆರೋಗ್ಯ ವಿಮೆ: ಪ್ರತಿಯೊಂದು ಕುಟುಂಬಕ್ಕೆ 25 ಲಕ್ಷ ರೂ. ಮೊತ್ತದ ಬೃಹತ್ ಆರೋಗ್ಯ ವಿಮಾ ಯೋಜನೆ. ಈ ಯೋಜನೆಗೆ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಹೆಸರಿಡಲಾಗಿದೆ.
-ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು 1,000 ರೂ.ಗಳ ಆರ್ಥಿಕ ಸಹಾಯಧನ.
ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗಾಗಿಯೇ ಪ್ರತ್ಯೇಕ ಸರ್ಕಾರಿ ಇಲಾಖೆಯ ಸ್ಥಾಪನೆ.
-ಯುವ ಉದ್ಯಮಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ
ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ವಿ.ಡಿ. ಸತೀಶನ್, ತೆಲಂಗಾಣದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅಧಿಕಾರಕ್ಕೆ ಬಂದ 100 ದಿನಗಳಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಿದ್ದಾರೆ. ಅದೇ ಮಾದರಿಯಲ್ಲಿ ಕೇರಳದಲ್ಲಿಯೂ ಯುಡಿಎಫ್ ತನ್ನ ಎಲ್ಲಾ ವಾಗ್ದಾನಗಳನ್ನು ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಯುಡಿಎಫ್ ಘೋಷಿಸಿರುವ ಈ ಗ್ಯಾರಂಟಿಗಳು ಆಡಳಿತಾರೂಢ ಎಲ್ಡಿಎಫ್ಗೆ (LDF) ತೀವ್ರ ಪೈಪೋಟಿ ನೀಡುವ ಸಾಧ್ಯತೆಯಿದೆ.
ಕೇರಳ ವಿಧಾನಸಭೆಗೆ ಏ.9ರಂದು ಮತದಾನ ನಡೆಯಲಿದೆ. ಮೇ.4ರಂದು ಮತ ಎಣಿಕೆ ನಡೆಯಲಿದೆ.