ಬಡ ಕುಟುಂಬದ ಅಳಲಿಗೆ ಆಸರೆಯಾದ ಹೈಕೋರ್ಟ್: ಲೋಕ ಅದಾಲತ್ ತೀರ್ಪು ಪ್ರಶ್ನಾತೀತವಲ್ಲ
ಬೆಂಗಳೂರು: ‘ಲೋಕ ಅದಾಲತ್ ತೀರ್ಪು ಪ್ರಶ್ನಾತೀತವಲ್ಲ’ ಎಂದು ಪ್ರಕರಣವೊಂದರಲ್ಲಿ ಪುನರುಚ್ಚರಿಸಿರುವ ಹೈಕೋರ್ಟ್, ‘ಲೋಕ ಅದಾಲತ್ನಲ್ಲಿ ವ್ಯಾಜ್ಯಕರ್ತ, ಉಭಯ ಪಕ್ಷಗಾರರ ಅನುಪಸ್ಥಿತಿಯಲ್ಲಿ ತೀರ್ಪು ಅಂಗೀಕೃತವಾಗಿದ್ದರೆ ಅಂತಹ ತೀರ್ಪು ಎಲ್ಲ ಕಾಲಕ್ಕೂ ಕಾನೂನುಬದ್ಧವಾಗಿದೆ ಮತ್ತು ಸರಿಯಾಗಿದೆ ಎಂದು ಹೇಳಲಾಗದು’ ಎಂದು ಸ್ಪಷ್ಟಪಡಿಸಿದೆ. ಮೋಟಾರು ವಾಹನ ಅಪಘಾತ ಪ್ರಕರಣವೊಂದರಲ್ಲಿ ಲೋಕ ಅದಾಲತ್ ತೀರ್ಪು ಪ್ರಶ್ನಿಸಿ ಹುಬ್ಬಳ್ಳಿ ಆನಂದನಗರದ ಬಡ ಕುಟುಂಬದ ತಾಯಿ–ಮಗ, ಶೈಲಾ ಐ ಕರ್ಕಿಹಳ್ಳಿಮಠ (37) ಮತ್ತು ವಿಶಾಲ್ ಐ ಕರ್ಕಿಹಳ್ಳಿಮಠ (11) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.
‘ಲೋಕ ಅದಾಲತ್ನಲ್ಲಿ ನಮಗೆ ನೀಡಲಾಗಿದ್ದ ಪರಿಹಾರದ ಮೊತ್ತವನ್ನು ಕಡಿಮೆ ಮಾಡಿರುವುದು ತಪ್ಪಾಗಿದೆ. ನಮ್ಮ ಪರವಾದ ಹಿಂದಿನ ವಕೀಲರು ಮತ್ತು ವಿಮಾ ಕಂಪನಿಯ ನಡುವೆ ಇತ್ಯರ್ಥ ಮಾಡಿಕೊಳ್ಳಲಾಗಿದೆ ಎಂಬುದು ನಮಗೆ ಯಾವತ್ತೂ ಗಮನಕ್ಕೆ ಬಂದೇ ಇರಲಿಲ್ಲ. ಆದ್ದರಿಂದ, ಲೋಕ ಅದಾಲತ್ನಲ್ಲಿ ಪರಿಹಾರದ ಮೊತ್ತವನ್ನು ಕಡಿಮೆ ಮಾಡಿ ಆದೇಶಿಸಿರುವುದನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂಬ ಅರ್ಜಿದಾರರ ವಾದವನ್ನು ನ್ಯಾಯಪೀಠ ಮನ್ನಿಸಿದೆ.
‘ಅರ್ಜಿ ದಾಖಲಿಸಿದ ದಿನದಿಂದ ಅರ್ಜಿದಾರರಿಗೆ ಪಾವತಿಯಾಗುವ ದಿನದವರೆಗೆ ವಾರ್ಷಿಕ ಶೇ 6ರ ಬಡ್ಡಿಯಂತೆ ₹9,18,600 ಪರಿಹಾರ ನೀಡಬೇಕು’ ಎಂಬ ನ್ಯಾಯಮಂಡಳಿ ಆದೇಶವನ್ನು ಪುನರ್ಸ್ಥಾಪಿಸಿದೆ. ‘ಅರ್ಜಿದಾರರ ಪರ ಅವರ ವಕೀಲರು ಸಹಿ ಮಾಡಿದ್ದಾರೆ. ಒಂದು ವೇಳೆ ಈ ರಿಟ್ ಅರ್ಜಿಯನ್ನು ಮನ್ನಿಸಿದರೆ ಪಂಡೋರಾ ಪಟ್ಟಿಗೆಯ ಬಾಯಿ ತೆಗೆದಂತಾಗುತ್ತದೆ. ಅನಿರೀಕ್ಷಿತ ಸಮಸ್ಯೆಗಳ ಸೃಷ್ಟಿಗೆ ಕಾರಣವಾಗುತ್ತದೆ’ ಎಂದು ಪ್ರತಿವಾದಿ ಇನ್ಶೂರೆನ್ಸ್ ಕಂಪನಿ ವಾದವನ್ನು ತಳ್ಳಿ ಹಾಕಿರುವ ನ್ಯಾಯಪೀಠ, ‘ಅರ್ಜಿದಾರರು ಜಂಟಿ ಮೆಮೊಗೆ (ಜ್ಞಾಪನ ಪತ್ರ) ಸಹಿ ಹಾಕಿಲ್ಲ ಎಂಬುದು ಗಮನಾರ್ಹ ಅಂಶ’ ಎಂದು ಯೋಗ್ಯತೆಯ ಆಧಾರದಡಿ ಅರ್ಜಿದಾರರ ಮನವಿಯನ್ನು ಪರಿಗಣಿಸಿದೆ.
‘ಲೋಕ ಅದಾಲತ್ನಲ್ಲಿ ಉಭಯ ಪಕ್ಷಗಾರರು ಒಪ್ಪಂದದ ನಿಯಮಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದಾರೆ ಮತ್ತು ಅದಾಲತ್ನ ಹೊರಗೆ ಮಾಡಿಕೊಂಡ ಯಾವುದೇ ಒಪ್ಪಂದಕ್ಕೆ ಅವರು ಸಹಿ ಹಾಕುವುದಿಲ್ಲ ಎಂಬುದನ್ನು ಲೋಕ ಅದಾಲತ್ ಸದಸ್ಯರು ಖಚಿತಪಡಿಸಿಕೊಳ್ಳಬೇಕು’ ಎಂದು ನ್ಯಾಯಪೀಠ ಎಚ್ಚರಿಸಿದೆ.