ಖರ್ಗೆ ವಿರುದ್ಧ ಶರ್ಮಾ ಹೇಳಿಕೆ: ಪ್ರಧಾನಿ ಮೋದಿ ಮೌನಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೀಡಿರುವ ಅವಹೇಳನಕಾರಿ ಹೇಳಿಕೆ ಸಂಬಂಧ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದು, ಇದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ಸಾಂ ಸಿಎಂ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಹಿಮಂತ ಬಿಸ್ವಾ ಶರ್ಮಾ, ಖರ್ಗೆ ಅವರಿಗೆ ವಯಸ್ಸಾದ ಕಾರಣದಿಂದ ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಖರ್ಗೆ ಅವರು ದೇಶದ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರು. ಅವರು ಕೇವಲ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಲ್ಲ, ಬದಲಿಗೆ ದಲಿತರು ಮತ್ತು ಶೋಷಿತ ವರ್ಗಗಳ ಧ್ವನಿಯಾಗಿದ್ದಾರೆ. ಅವರನ್ನು ಅವಮಾನಿಸುವುದು ದೇಶದ ಕೋಟ್ಯಂತರ ಜನರನ್ನು ಅವಮಾನಿಸಿದಂತೆ.ಅಸ್ಸಾಂ ಸಿಎಂ ಅವರ ಈ ಹೇಳಿಕೆಯನ್ನು ಪ್ರಧಾನಿ ಮೋದಿ ಅವರು ಬೆಂಬಲಿಸುತ್ತಾರೆಯೇ? ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಹಿಮಂತ ಬಿಸ್ವ ಶರ್ಮಾ ಅವರ ಭಾಷೆಯು ಬಿಜೆಪಿ ಮತ್ತು ಆರ್ಎಸ್ಎಸ್ನ ದಲಿತ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಯಾವಾಗ ಒಬ್ಬ ದಲಿತ ನಾಯಕ ಸತ್ಯವನ್ನು ಮಾತನಾಡುತ್ತಾರೋ, ಆಗ ಅವರನ್ನು ಅವಮಾನಿಸುವುದು ಇವರ ಹಳೆಯ ಚಾಳಿ ಎಂದು ಟೀಕಿಸಿದ್ದಾರೆ.
ಈ ವಿಚಾರದಲ್ಲಿ ಪ್ರಧಾನಿಯವರ ಮೌನವು ಅವರ ಅಸಹಾಯಕತೆಯಲ್ಲ. ಬದಲಿಗೆ, ಸಿಎಂ ಹೇಳಿಕೆಗೆ ಅವರ ಸಹಮತವಿದೆ ಎಂಬುದನ್ನು ತೋರಿಸುತ್ತದೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ.