ಸಮರ್ಥ್ ಸೋಲಿಸಲು ಮುಸ್ಲಿಂ ನಾಯಕರ ಷಡ್ಯಂತ್ರ: ಕಾಂಗ್ರೆಸ್ ಹೈಕಮಾಂಡ್ಗೆ ದೂರು
ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಮಗಿದ ಬೆನ್ನಲ್ಲೇ ಮುಸ್ಲಿಂ ಸಮುದಾಯದ ಮುಖಂಡರ ಒಳಜಗಳ ತಾರಕ್ಕೇರಿದ್ದು, ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದರು ಎಂದು ಆರೋಪಿಸಿ ಮೂವರು ಪ್ರಭಾವಿ ಮುಸ್ಲಿಂ ನಾಯಕರ ವಿರುದ್ಧ ಪಕ್ಷದ ಹೈಕಮಾಂಡ್ಗೆ ದೂರು ಸಲ್ಲಿಕೆಯಾಗಿದೆ. ‘ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಪಕ್ಷ ಆಯ್ಕೆ ಮಾಡಿದ್ದ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದರು.
ತಾವು ಹೇಳಿದ ಹಾಗೆ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲಿಲ್ಲ ಎನ್ನುವ ಕಾರಣಕ್ಕೆ ಇಂತಹ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ಸಲ್ಲಿಸಿದ್ದಾರೆ’ ಎಂದು ಪಕ್ಷದ ಮೂಲಗಳು ಹೇಳಿವೆ.
ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಮತದಾರರ ಸಂಖ್ಯೆ ಸುಮಾರು 70 ಸಾವಿರಷ್ಟಷ್ಟಿದೆ. ಹಾಗಾಗಿ, ಮುಸ್ಲಿಂ ಅಭ್ಯರ್ಥಿಗೇ ಟಿಕೆಟ್ ನೀಡಬೇಕು ಎಂದು ಜಮೀರ್ ಅಹಮದ್ ಸೇರಿದಂತೆ ಬಹುತೇಕ ಮುಸ್ಲಿಂ ನಾಯಕರು ಪಟ್ಟು ಹಿಡಿದಿದ್ದರು.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರದಲ್ಲಿ ಅವರ ಮೊಮ್ಮಗ.
ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ಗೆ ಟಿಕೆಟ್ ನೀಡಬೇಕು ಎಂದು ಅವರ ಕುಟುಂಬ ಪಟ್ಟು ಹಿಡಿದಿತ್ತು. ಸಚಿವರಾದ ಈಶ್ವರ ಖಂಡ್ರೆ, ಶರಣಪ್ರಕಾಶ ಪಾಟೀಲ ಸೇರಿದಂತೆ ಹಲವರು, ಶಾಸಕರು ಮೃತರಾದಾಗ ಅನುಕಂಪದ ಆಧಾರದಲ್ಲಿ ಮೃತರ ಕುಟುಂಬಕ್ಕೇ ಟಿಕೆಟ್ ನೀಡುತ್ತಾ ಬರಲಾಗಿದೆ. ಬಾಗಲಕೋಟೆಯಂತೆ ದಾವಣಗೆರೆಯಲ್ಲೂ ಇದೇ ನಿಯಮ ಅನುಸರಿಸಬೇಕು ಎಂದು ಒತ್ತಡ ಹಾಕಿದ್ದರು.