ಕರ್ನಾಟಕ ಕಾಂಗ್ರೆಸ್ನಲ್ಲಿ ದೊಡ್ಡ ಬೆಳವಣಿಗೆ.. ಅಬ್ದುಲ್ ಜಬ್ಬಾರ್ ರಾಜೀನಾಮೆ, ಪತ್ರದಲ್ಲಿ ಜಮೀರ್ ಹೆಸರು
ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಿಸಿ ಈಗ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಉಪಚುನಾವಣೆಯ ಸಂದರ್ಭದಲ್ಲಿ ನಡೆದ ಆಂತರಿಕ ಗೊಂದಲ ಹಾಗೂ ಅಸಮಾಧಾನದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ. ಅಬ್ದುಲ್ ಜಬ್ಬಾರ್ (MLC) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ದಾವಣಗೆರೆ ಉಪಚುನಾವಣೆಯಲ್ಲಿ ನಡೆದ ಆಂತರಿಕ ಚಟುವಟಿಕೆಗಳ ಬಗ್ಗೆ ಎಐಸಿಸಿ (AICC) ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಹೈಕಮಾಂಡ್ಗೆ ವರದಿ ಸಲ್ಲಿಸಿದ್ದರು. ಈ ವರದಿಯಲ್ಲಿ ಅಲ್ಪಸಂಖ್ಯಾತ ನಾಯಕರ ನಡವಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿತ್ತು ಎನ್ನಲಾಗಿದೆ. ಹೈಕಮಾಂಡ್ ಸಸ್ಪೆಂಡ್ ಮಾಡುವ ಮುನ್ಸೂಚನೆ ಸಿಗುತ್ತಿದ್ದಂತೆಯೇ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಅಬ್ದುಲ್ ಜಬ್ಬಾರ್ ತಮ್ಮ ರಾಜೀನಾಮೆ ಪತ್ರದಲ್ಲಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ದಾವಣಗೆರೆ ಉಪಚುನಾವಣೆ ಪ್ರಚಾರಕ್ಕೆ ಬರಬೇಡಿ ಎಂದು ಬಹಿರಂಗವಾಗಿ ಹೇಳುವ ಮೂಲಕ ಅಗೌರವ ತೋರಲಾಗಿದೆ. ಇದು ರಾಜ್ಯಾದ್ಯಂತ ಇರುವ ಅಲ್ಪಸಂಖ್ಯಾತ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಸ್ಲಿಂ ಸಮುದಾಯದ ಮನಸ್ಸಿಗೆ ನೋವುಂಟು ಮಾಡಿದೆ. ಹಿರಿಯ ನಾಯಕರನ್ನು ಕಡೆಗಣಿಸುವ ಮತ್ತು ಸೈಡ್ಲೈನ್ ಮಾಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.