ಮಹಿಳಾ ಮೀಸಲಾತಿ ಸಂಬಂಧ ಪ್ರತಿಭಟನೆ ಬೇಡ: ಕಾರ್ಯಕರ್ತರಿಗೆ ಮಾಯಾವತಿ ಸೂಚನೆ
ಲಖನೌ: ಮಹಿಳಾ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರತಿಭಟನೆ ನಡೆಸದಂತೆ ಪಕ್ಷದ ಕಾರ್ಯಕರ್ತರಿಗೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಸೂಚಿಸಿದ್ದಾರೆ. ಮಹಿಳಾ ಮೀಸಲಾತಿ ಕೋಟಾದೊಳಗೆ ಎಸ್ಸಿ, ಎಸ್ಟಿ ಮತ್ತು ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ಇರಬೇಕು ಎಂಬ ಪಕ್ಷದ ನಿಲುವಿಗೆ ಬದ್ಧವಾಗಿದ್ದೇವೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ. ಮಹಿಳಾ ಮೀಸಲಾತಿ ವಿಷಯದ ಬಗ್ಗೆ ಯಾವುದೇ ಗೊಂದಲ ಉಂಟಾಗದಂತೆ ಕಾರ್ಯಕರ್ತರಿಗೆ ಮಾಹಿತಿ ನೀಡುವಂತೆ ಅವರು ಮುಖಂಡರಿಗೆ ಸೂಚಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ಪ್ರತಿಭಟನೆಯನ್ನು ನಡೆಸಬಾರದು ಎಂದೂ ಹೇಳಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಡೆ ಗಮನ ಹರಿಸಲು ಹೇಳಿರುವ ಅವರು, ರಾಜ್ಯದಲ್ಲಿ ಬಿಎಸ್ಪಿ ಸರ್ಕಾರದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಹಾಗೂ ಜನಕಲ್ಯಾಣ ಕಾರ್ಯಗಳನ್ನು ಜನರಿಗೆ ತಲುಪಿಸುವಂತೆ ಅವರು ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.
‘ಎಕ್ಸ್ಪ್ರೆಸ್ವೇಗಳು ಮತ್ತು ನೋಯ್ಡಾದ ವಿಮಾನ ನಿಲ್ದಾಣ ಸೇರಿದಂತೆ ಹಲವಾರು ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಬಿಎಸ್ಪಿ ಆಡಳಿತದ ಅವಧಿಯಲ್ಲಿ ರೂಪಿಸಲಾಗಿತ್ತು. ಆದರೆ ಅಂದಿನ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರವು ಒಡ್ಡಿದ ಅಡೆತಡೆಗಳಿಂದಾಗಿ ಅವುಗಳನ್ನು ಮುಂಚಿತವಾಗಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂಬ ವಿಷಯವನ್ನು ಕಾರ್ಯಕರ್ತರು ಜನರಿಗೆ ತಿಳಿಸಬೇಕು’ ಎಂದು ಮಾಯಾವತಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.