ಭಯೋತ್ಪಾದನೆ ಮಟ್ಟ ಹಾಕುವಲ್ಲಿ ದ್ವಂದ್ವ ನೀತಿ ಇರಬಾರದು: ರಾಜನಾಥ್ ಸಿಂಗ್
ನವದೆಹಲಿ: ಭಯೋತ್ಪಾದನೆಯನ್ನು ಮಟ್ಟಹಾಕಲು ದ್ವಂದ್ವ ನೀತಿ ಇರಬಾರದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಬಿಷ್ಕೆಕ್ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಸಭೆಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಭಯೋತ್ಪಾದಕ ಗುಂಪುಗಳಿಗೆ ನೆರವು ನೀಡುವ ರಾಷ್ಟ್ರಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಭಯೋತ್ಪಾದನೆಗೆ ಕುಮ್ಮಕ್ಕು ಮತ್ತು ಆಶ್ರಯ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲು ಎಸ್ಸಿಒ ಸಂಘಟನೆಯು ಹಿಂಜರಿಯಬಾರದು ಎಂದು ಸಿಂಗ್ ತಿಳಿಸಿದ್ದಾರೆ.
ಭಯೋತ್ಪಾದನೆ ವಿರುದ್ಧ ಭಾರತವು ತನ್ನ ದೃಢ ಸಂಕಲ್ಪವನ್ನು ಈಗಾಗಲೇ ಪ್ರದರ್ಶಿಸಿದೆ. 'ಆಪರೇಷನ್ ಸಿಂಧೂರ' ಮೂಲಕ ಭಯೋತ್ಪಾದನೆಗಳಿಗೆ ಸಂಚು ರೂಪಿಸುವವರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ಸಂದೇಶವನ್ನು ಭಾರತ ರವಾನಿಸಿದೆ ಎಂದು ಹೇಳಿದ್ದಾರೆ. ರಾಷ್ಟ್ರದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಗಡಿಯಾಚೆಗಿನ ಪ್ರಾಯೋಜಿತ ಭಯೋತ್ಪಾದನೆಯನ್ನು ನಾವು ನಿರ್ಲಕ್ಷಿಸಬಾರದು. ಇದು ಇಡೀ ವಿಶ್ವ ವ್ಯವಸ್ಥೆಗೆ ದೊಡ್ಡ ಸವಾಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಜಗತ್ತು ಏಕಪಕ್ಷೀಯ ನಿರ್ಧಾರಗಳು ಮತ್ತು ಹೆಚ್ಚುತ್ತಿರುವ ಸಂಘರ್ಷಗಳಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಉಗ್ರವಾದ ಮತ್ತು ಮೂಲಭೂತವಾದವು ಜಾಗತಿಕ ಸಮಸ್ಯೆಯಾಗಿದೆ ಎಂದಿದ್ದಾರೆ.