Video | ಇಂಧನ ಬಳಕೆ ತಗ್ಗಿಸಲು ಮೋದಿ ಕರೆ: ಶಾ ಬೆಂಗಾವಲು ವಾಹನಗಳಲ್ಲೂ ಕಡಿತ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಬಳಕೆ ಕಡಿಮೆ ಮಾಡುವಂತೆ ಕರೆ ನೀಡಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಕಡಿತಗೊಳಿಸಿದ್ದಾರೆ ಎಂದು ವರದಿಯಾಗಿದೆ. ಈಚೆಗೆ ಹೈದರಾಬಾದ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದ ಯುದ್ಧದಿಂದಾಗಿ ಭಾರತದ ಆರ್ಥಿಕತೆಯ ಮೇಲೆ ಬೀರುವ ಪರಿಣಾಮಗಳನ್ನು ಎದುರಿಸಲು ಕೆಲವು ಸಲಹೆಗಳನ್ನು ನೀಡಿದ್ದರು. ಪೆಟ್ರೋಲ್ ಮತ್ತು ಡೀಸೆಲ್ ಬಳಕೆ ಕಡಿಮೆ ಮಾಡುವುದು, ಮೆಟ್ರೊ ರೈಲು ಬಳಕೆ, ಕಾರ್ಪೂಲಿಂಗ್ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡುವುದು. ಕನಿಷ್ಠ ಒಂದು ವರ್ಷದ ಮಟ್ಟಿಗೆ ಚಿನ್ನದ ಖರೀದಿ ಮತ್ತು ವಿದೇಶಿ ಪ್ರವಾಸ ಮುಂದೂಡುವುದು. ಸಾಧ್ಯವಿರುವ ಕಡೆ ವರ್ಕ್ ಫ್ರಮ್ ಹೋಮ್ (ಮನೆಯಿಂದಲೇ ಕೆಲಸ) ಮಾಡುವುದು. ಖಾದ್ಯ ತೈಲ ಮತ್ತು ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಮಿತಗೊಳಿಸಿ, ನೈಸರ್ಗಿಕ ಕೃಷಿ ಹಾಗೂ ಸ್ವದೇಶಿ ಉತ್ಪನ್ನಗಳಿಗೆ ಒತ್ತು ನೀಡಬೇಕೆಂದು ಮೋದಿ ಸಲಹೆ ನೀಡಿದ್ದರು. ಪಶ್ಚಿಮ ಏಷ್ಯಾದ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶದ ಆರ್ಥಿಕ ಸ್ಥಿರತೆಯನ್ನು ಕಾಯ್ದುಕೊಳ್ಳಲು ಈ ಕ್ರಮಗಳು ಅನಿವಾರ್ಯ ಎಂದು ಮೋದಿ ಒತ್ತಿ ಹೇಳಿದ್ದರು.