Mangaluru: ಮುಂದಿನ 4 ತಿಂಗಳು ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ಮಾಡುವಂತಿಲ್ಲ!
ಮಂಗಳೂರು: ಮಳೆಗಾಲ ಸಮಯದಲ್ಲಿ ಭೂಕುಸಿತದಂತಹ ಅನಾಹುತಗಳನ್ನು ತಪ್ಪಿಸಲು ಜೂನ್ 1ರಿಂದ ಸಪ್ಟೆಂಬರ್ 30ರವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಣ್ಣು ಅಗೆತ, ರಸ್ತೆ ಅಗೆತದಂತಹ ಯಾವುದೇ ಕಾಮಗಾರಿ ನಡೆಸಬಾರದು ಎಂದು ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ. ಮಣ್ಣು ಕುಸಿತ, ಗುಡ್ಡ ಕುಸಿತ, ಸಾರ್ವಜನಿಕ ಆಸ್ತಿಪಾಸ್ತಿ ಮತ್ತು ಪ್ರಾಣಹಾನಿಯಾಗುವುದನ್ನು ತಪ್ಪಿಸಲು ಈ ನಾಲ್ಕು ತಿಂಗಳ (01-06-2026-30-09-2026) ಸಮಯದಲ್ಲಿ ಯಾವುದೇ ರೀತಿಯ ರಸ್ತೆ ಅಗೆತ, ಗುಡ್ಡ ಅಗೆತ ಹಾಗೂ ಮಣ್ಣು ಅಗೆತದ ಕಾಮಗಾರಿಗಳನ್ನು ಮಾಡದಂತೆ ಸೂಚಿಸಲಾಗಿದೆ. ಈ ಅವಧಿಯಲ್ಲಿ ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಈಗಾಗಲೇ ಪಾಲಿಕೆಯಿಂದ ಪರವಾನಿಗೆ ಪಡೆದು ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಿದ್ದಲ್ಲಿ ಕಾಮಗಾರಿಯ ಅಕ್ಕಪಕ್ಕದ ಸ್ಥಳಗಳಿಗೆ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಿ, ಬ್ಯಾಕ್ ಫಿಲ್ಲಿಂಗ್ ಕಾಮಗಾರಿ ನಿರ್ವಹಿಸಬೇಕು ಎಂದು ಪಾಲಿಕೆ ಸೂಚಿಸಿದೆ. ಯಾವುದೇ ಅನಾಹುತ ಸಂಭವಿಸಿದರೆ ಅದಕ್ಕೆ ಮಾಲೀಕರು ಮತ್ತು ಸಂಬಂಧಪಟ್ಟ ಇಂಜಿನಿಯರ್ ನೇರ ಹೊಣೆಯಾಗುತ್ತಾರೆ ಎಂದು ಪ್ರಕಟಣೆ ತಿಳಿಸಿದೆ. ನಗರದ ಕುಂಟಿಕಾನದಲ್ಲಿ ಗುರುವಾರ (ಮೇ 21) ತಡೆಗೋಡೆ ನಿರ್ಮಾಣ ವೇಳೆ ಮಣ್ಣು ಕುಸಿದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆಯ ಬೆನ್ನಲ್ಲೇ ಮಂಗಳೂರು ಮಹಾನಗರ ಪಾಲಿಕೆ ಈ ಆದೇಶ ಹೊರಡಿಸಿದೆ.