ಸರ್ಕಾರಿ ಅಧಿಕಾರಿಗಳಿನ್ನು ಬೆಳಗ್ಗೆ 10 ಗಂಟೆಗೆ ಆಫೀಸ್ನಲ್ಲಿರಲೇಬೇಕು: ಇಲ್ಲಾಂದ್ರೆ ಇಲಾಖಾ ಮುಖ್ಯಸ್ಥರಿಗೆ ಹೋಗುತ್ತೆ AI ರಿಪೋರ್ಟ್!
ರಾಜ್ಯ ಸರ್ಕಾರಿ ನೌಕರರ ಸರಣಿ ಗೈರುಹಾಜರಿ ಹಾಗೂ ವಿಳಂಬಕ್ಕೆ ಬ್ರೇಕ್ ಹಾಕಲು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇನ್ಮುಂದೆ ಪ್ರತಿಯೊಬ್ಬ ಸಿಬ್ಬಂದಿಯೂ ಬೆಳಗ್ಗೆ 10 ಗಂಟೆಯೊಳಗೆ 'ಕರ್ತವ್ಯ' ಆಪ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ AI ತಂತ್ರಜ್ಞಾನದ ಮೂಲಕ ಸ್ವಯಂಚಾಲಿತವಾಗಿ ಇಲಾಖಾ ಮುಖ್ಯಸ್ಥರಿಗೆ ವರದಿ ರವಾನೆಯಾಗಲಿದೆ.
ಬೆಂಗಳೂರು, ಜೂನ್ 06: ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಸರಣಿ ಗೈರುಹಾಜರಿ ಹಾಗೂ ವಿಳಂಬಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಈಗ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೊರೆ ಹೋಗಿದೆ. ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಯು ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಮುಖ್ಯಮಂತ್ರಿಗಳು ಗುರುವಾರ (ಜೂನ್ 4) ನಡೆಸಿದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ (CS) ಶಾಲಿನಿ ರಜನೀಶ್ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಬೆಳಗ್ಗೆ 10 ಗಂಟೆಯೊಳಗೆ ಎಲ್ಲಾ ಸರ್ಕಾರಿ ಅಧಿಕಾರಿಗಳು ಕಚೇರಿಗೆ ಹಾಜರಾಗುವುದು ಕಡ್ಡಾಯ. ನೌಕರರ ಹಾಜರಾತಿ ಪತ್ತೆ ಹಚ್ಚಲು ಇ-ಆಡಳಿತ ಇಲಾಖೆಯಿಂದ ‘ಕರ್ತವ್ಯ’ ಆಪ್ ಬಳಕೆ. ಲೇಟಾಗಿ ಬರುವ ಸಿಬ್ಬಂದಿಗಳ ಪಟ್ಟಿಯನ್ನು ಸ್ವಯಂಚಾಲಿತವಾಗಿ ಸಿದ್ಧಪಡಿಸಲಿದೆ AI ತಂತ್ರಜ್ಞಾನ. ‘ಕರ್ತವ್ಯ App’ ಬಳಕೆ ಕಡ್ಡಾಯ ಸರ್ಕಾರಿ ನೌಕರರ ಹಾಜರಾತಿಯನ್ನು ಡಿಜಿಟಲೀಕರಣಗೊಳಿಸಲು ಇ-ಆಡಳಿತ ಇಲಾಖೆಯು ಕರ್ತವ್ಯ (KAAMS) App ಸಿದ್ಧಪಡಿಸಿದೆ. ಈಗಾಗಲೇ HRMS ತಂತ್ರಾಂಶದಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಮಾಹಿತಿಯನ್ನು ಇದರಲ್ಲಿ ನೋಂದಾಯಿಸಲಾಗಿದೆ. ಆದರೆ, ಬಹಳಷ್ಟು ಸಿಬ್ಬಂದಿಗಳು ಈ ಆಪ್ ಅನ್ನು ನಿರಂತರವಾಗಿ ಬಳಸುತ್ತಿಲ್ಲದಿರುವುದು ಸರ್ಕಾರದ ಗಮನಕ್ಕೆ ಬಂದಿದೆ.