ಎಸ್ಐಆರ್ಗೆ ‘ಮಾಸ್ ವಾರ್ʼ:ತಿರುಗಿಬಿದ್ದ ಮೂರೂ ಪಕ್ಷಗಳು
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ದಿನದಿಂದ ದಿನಕ್ಕೆ ವಿವಾದ ಹಾಗೂ ಗೊಂದಲದ ಸ್ವರೂಪ ಪಡೆದುಕೊಳ್ಳುತ್ತಿದೆ. ಜತೆಗೆ ಪ್ರತಿಪಕ್ಷಗಳಾದ ಬಿಜೆಪಿ ಜೆಡಿಎಸ್ ಹಾಗೂ ಕಾಂಗ್ರೆಸ್ ಸರ್ಕಾರ ನಡುವಿನ ಜಟಾಪಟಿ ತಾರಕಕ್ಕೇರಿದೆ. ಈಗ ಇಡೀ ಎಸ್ಐಆರ್ ಪ್ರಕ್ರಿಯೆ ವಿರುದ್ಧ ರಾಜ್ಯ ಸರ್ಕಾರ ಹಾಗೂ ವಿಪಕ್ಷಗಳು ತಿರುಗಿಬಿದ್ದಿವೆ. ಈ ಮಧ್ಯೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಈಗಿನ ಎಸ್ಐಆರ್ ಪ್ರಕ್ರಿಯೆಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿದ್ದಾರೆ. ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರವು, ಎಸ್ಐಆರ್ ಪ್ರಕ್ರಿಯೆ ಬಗ್ಗೆ ಜನರಲ್ಲಿ ಇರುವ ಗೊಂದಲ ಬಗೆಹರಿಸಿ ಎಂದು ಆಯೋಗಕ್ಕೆ ಸಾಕಷ್ಟು ಬಾರಿ ಕೇಳಿದರೂ, ಸ್ಪಂದಿಸುತ್ತಿಲ್ಲ ಎಂದು ಕಿಡಿಕಾರಿದೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಬಿಎಲ್ಒಗಳನ್ನು ದುರ್ಬಳಕೆ ಮಾಡಿಕೊಂಡು ತನ್ನ ಮತದಾರರ ರಕ್ಷಣೆಗೆ ಮುಂದಾಗಿದೆ.
ಕಲ್ಯಾಣ ಮಂಟಪ, ಮಸೀದಿ, ಸಮುದಾಯ ಭವನ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಮತದಾರರನ್ನು ಗುಂಪು ಗುಂಪಾಗಿ ಸೇರಿಸಿಕೊಂಡು ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದೆ. ಇದು ಅಧಿಕಾರ ದುರ್ಬಳಕೆಗೆ ಸ್ಪಷ್ಟ ನಿದರ್ಶನ ಎಂಬುದು ಬಿಜೆಪಿಯ ಆರೋಪವಾಗಿದೆ. ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಪ್ರಶ್ನಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದೆ. ಅನೇಕ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ (ಚುನಾವಣೆ ಪ್ರಕ್ರಿಯೆ ಉಸ್ತುವಾರಿಗಳು) ಎಸ್ಐಆರ್ ದುರ್ಬಳಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ನೇರವಾಗಿ ಆರೋಪಿಸಿದ್ದಾರೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯುಕ್ತರಿಗೆ ಸೋಮವಾರ ದೂರು ಕೊಡುವುದಾಗಿಯೂ ಹೇಳಿದ್ದಾರೆ.