ಬರ ಪರಿಸ್ಥಿತಿ ಎದುರಿಸಲು ಸರ್ಕಾರದ ಬಳಿ ಸಾಕಷ್ಟು ಅನುದಾನವಿದೆ: DCM ಡಾ. ಜಿ. ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರದ ಬಳಿ ಸಾಕಷ್ಟು ಅನುದಾನ ಲಭ್ಯವಿದ್ದು, ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಜಕ್ಕೂರು ಏರೋಡ್ರೋಮ್ನಲ್ಲಿರುವ ಸರ್ಕಾರಿ ಫ್ಲೈಯಿಂಗ್ ತರಬೇತಿ ಶಾಲೆ (GFTS)ಯಲ್ಲಿ ವಿಮಾನ ಹಾರಾಟ ತರಬೇತಿ ಮುಂದುವರಿಸುವ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ಬೆಂಗಳೂರು ಕಂದಾಯ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆದ ಬಳಿಕ ಮೈಸೂರು ಕಂದಾಯ ವಿಭಾಗದ ಬರ ಪರಿಸ್ಥಿತಿಯನ್ನೂ ಪರಿಶೀಲಿಸಲಾಗುವುದು ಎಂದು ಹೇಳಿದರು. ಮೈಸೂರು ಕಂದಾಯ ವಿಭಾಗದ ಪರಿಶೀಲನಾ ಸಭೆಯ ದಿನಾಂಕ ಹಾಗೂ ಸ್ಥಳವನ್ನು ಇನ್ನೂ ನಿಗದಿಪಡಿಸಿಲ್ಲ ಎಂದು ತಿಳಿಸಿದ ಅವರು, ರಾಜ್ಯದ ಬಹುತೇಕ ಜಲಾಶಯಗಳು ಕನಿಷ್ಠ ಮಟ್ಟ ತಲುಪಿರುವುದನ್ನು ಒಪ್ಪಿಕೊಂಡರು. ರಾಜ್ಯದ ನಾಲ್ಕು ಕಂದಾಯ ವಿಭಾಗಗಳ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಬರದ ಸಂಪೂರ್ಣ ಚಿತ್ರಣ ದೊರೆಯಲಿದೆ. ಅದರ ಆಧಾರದ ಮೇಲೆ ಮುಂದಿನ ಕ್ರಮಗಳ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು. ಕುಡಿಯುವ ನೀರಿನ ಸಮಸ್ಯೆ ಎದುರಿಸಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ತಲಾ ರೂ.5 ಕೋಟಿ ಅನುದಾನ ನೀಡಲಾಗಿದೆ. ಜೊತೆಗೆ, ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ರೂ.1 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸರ್ಕಾರದ ಬಳಿ ಸಾಕಷ್ಟು ಅನುದಾನವಿದೆ. ಕೇಂದ್ರ ಸರ್ಕಾರವೂ ಈ ವಿಷಯದಲ್ಲಿ ನೆರವು ನೀಡಲಿದೆ ಎಂಬ ನಿರೀಕ್ಷೆಯಿದೆ. ಆಗಸ್ಟ್ ಎರಡನೇ ವಾರದ ಬಳಿಕ ಬರ ಪರಿಸ್ಥಿತಿ ಕುರಿತ ಸಮಗ್ರ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಇದುವರೆಗೆ ಕಳುಹಿಸಿರುವ ಪತ್ರಗಳಿಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. "ಪ್ರಸ್ತಾವನೆ ಸಲ್ಲಿಸಿದ ಬಳಿಕ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಿದೆ ಎಂದು ತಿಳಿಸಿದರು.